13/06/2026
ನಾಪತ್ತೆಯಾದ ಮಗಳಿಗಾಗಿ ಹುಡುಕಾಟ... ಅಂತಿಮವಾಗಿ ಬಾವಿಯಲ್ಲಿ ಸಿಕ್ಕಿತು ಮೃತದೇಹ!
ಭಟ್ಕಳದಲ್ಲಿ ಹೃದಯವಿದ್ರಾವಕ ಘಟನೆ!
ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಡೆದಿದೆ.
ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ಕಾಣೆಯಾಗಿದ್ದಳು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಆದರೆ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿನಿಯ ಮನೆಯ ಸಮೀಪದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯ ಕಾಲೇಜಿನಲ್ಲಿ ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಗಾಯತ್ರಿ ಚುರುಕು ಮತ್ತು ಪ್ರತಿಭಾವಂತೆಯಾಗಿದ್ದಳು ಎನ್ನಲಾಗಿದೆ. ಆಕೆಯ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಇಡೀ ಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ.
ಪ್ರಾಥಮಿಕವಾಗಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ಹಿಂದಿನ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಘಟನೆಯ ಸಂಪೂರ್ಣ ಸತ್ಯ ಹೊರಬರಲಿದೆ.
ಈ ಕುರಿತು ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.